ಚಿಕ್ಕಮಗಳೂರು : ಸರ್ವೇ ಸ್ಕೆಚ್ ಮಾಡಿಕೊಡಲು ಲಂಚಕ್ಕೆ ಬೇಡಿಕೆ – ಸರ್ಕಾರಿ ಸರ್ವೇಯರ್ ಲೋಕಾಯುಕ್ತ ಬಲೆಗೆ
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದ ಎ.ಡಿ.ಎಲ್.ಆರ್. ಕಚೇರಿಯಲ್ಲಿ ಸರ್ವೇ ಸ್ಕೆಚ್ ಮಾಡಿಕೊಡುವುದಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸರ್ಕಾರಿ ಸರ್ವೇಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ದೇವವೃಂದ ಗ್ರಾಮದ ಮಂಜುನಾಥ್ ಎಂಬುವವರ ಜಮೀನಿನ ಸರ್ವೇ ನಡೆಸಿ ಸ್ಕೆಚ್ ನೀಡಲು ಸರ್ಕಾರಿ ಸರ್ವೇಯರ್ ಸುಮಾ ಅವರು 20 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಕುರಿತು ಮಂಜುನಾಥ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಮೂಡಿಗೆರೆ ಎ.ಡಿ.ಎಲ್.ಆರ್. ಕಚೇರಿಯಲ್ಲೇ ಸರ್ಕಾರಿ ಸರ್ವೇಯರ್ ಸುಮಾ ಅವರನ್ನು ಬಲೆಗೆ ಬೀಳಿಸಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.

